ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿ, ವಜಾಗೊಂಡಿರುವ ಸಾರಿಗೆ ನೌಕರರನ್ನು ನಾಲ್ಕು ವಾರಗಳಲ್ಲಿ ಮರು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ಮತ್ತಿತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಏಪ್ರಿಲ್ನಲ್ಲಿ ನಿರಂತರ ಮುಷ್ಕರ ನಡೆಸಿದ್ದರು. ಮುಷ್ಕರ ಕೈಬಿಟ್ಟು, ಸೇವೆಗೆ ಹಾಜರಾಗಬೇಕು ಎಂಬ ಸರಕಾರದ ಮನವಿಗೂ ಸ್ಪಂದಿಸದೆ, ಅನಧಿಕೃತ ಗೈರು ಹಾಜರಾಗಿದ್ದರು. ಅವರಲ್ಲಿ ಅನೇಕರನ್ನು ಅಮಾನತುಗೊಳಿಸಲಾಗಿತ್ತು. ಕೆಲವರಿಗೆ ಕಡ್ಡಾಯ ವರ್ಗಾವಣೆ ಶಿಕ್ಷೆ ವಿಧಿಸಲಾಗಿತ್ತು. ನಾನು ಸಾರಿಗೆ ಮಂತ್ರಿಯಾದ ಬಳಿಕ ಸಿಬ್ಬಂದಿಗಳ ಅಮಾನತು, ವರ್ಗಾವಣೆಯನ್ನು ಹಿಂಪಡೆದಿದ್ದೇನೆ ಎಂದವರು ತಿಳಿಸಿದ್ದಾರೆ.
ಆದರೆ ವಜಾಗೊಂಡಿರುವ ಸಾರಿಗೆ ನೌಕರರು ಹೈಕೋರ್ಟ್ ಮೊರೆ ಹೋಗಿದ್ದರಿಂದ ಕಾನೂನಾತ್ಮಕ ತೊಡಕಿನಿಂದಾಗಿ ಅವರನ್ನು ಮರು ನಿಯುಕ್ತಿಗೊಳಿಸಲು ಸಾಧ್ಯವಾಗಿಲ್ಲ. ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ಮಾನವೀಯ ದೃಷ್ಟಿಯಿಂದ ಸರಕಾರ ಅವರನ್ನು ಮರು ನಿಯುಕ್ತಿಗೆ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಮುಂದಿನ ನಾಲ್ಕು ವಾರಗಳಲ್ಲಿ ಲೋಕ ಅದಾಲತ್ ಮೂಲಕ ಕಾನೂನಾತ್ಮಕ ಸಮಸ್ಯೆಯನ್ನು ಇತ್ಯರ್ಥ ಪಡಿಸಿ, ಸೇವೆಗೆ ಮರು ಸೇರ್ಪಡೆಗೊಳಿಸಲು ಕ್ರಮವಹಿಸಲು ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….