ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಜನವರಿ 17ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಕಲ್ಲುಕುಂಟೆ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಪ್ರತಿ ತಿಂಗಳ ಮೂರನೇ ಶನಿವಾರದಂದು “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ”ಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದ್ದು, ಅದರಂತೆ ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಹಾಗೂ ಜನವರಿ 16 ರಂದು ಭಾನುವಾರ ರಜಾ ದಿನ ಇರುವುದರಿಂದ ಜನವರಿ 17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅದರಂತೆಯೇ ಜನವರಿ 17 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕಸಬಾ ಹೋಬಳಿಯ ಆವತಿ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮೋಹನ್ ಕುಮಾರಿ ಅವರು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮಂಜುನಾಥ್ ಅವರು ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….