ಮಳವಳ್ಳಿ Crime news: ಕೋಳಿ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಮಾದಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಜಯರಾಮು ಪುತ್ರ ಗಿರೀಶ್ ಕೊಲೆಯಾದ ಯುವಕ. ಕೊಲೆ ಆರೋಪ ಹಿನ್ನೆಲೆಯಲ್ಲಿ ಅದೇ ಗ್ರಾಮದ ಸಾಗರ್, ತಾಯಮ್ಮ, ಸಹನಾ ಅವರ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅ.6 ರಂದು ಗಿರೀಶ್ ಅವರಿಗೆ ಸೇರಿದ ಕೋಳಿಗಳು ತಾಯಮ್ಮ ಅವರ ಮನೆ ಮುಂದೆ ಮೇಯುತ್ತಿದ್ದ ಹಿನ್ನೆಲೆಯಲ್ಲಿ ತಾಯಮ್ಮ, ಮಕ್ಕಳಾದ ಸಾಗರ್, ಸಹನಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರಕ್ಕೆ ಜಗಳ ನಡೆದು ಗಿರೀಶ್ ಅವರ ಮೇಲೆ ಮೂವರೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಗಿರೀಶ್ ಅವರನ್ನು ಕನಕಪುರದ ದಯಾನಂದ ಸಾಗರ್ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
11 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಿರೀಶ್ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.