ಬೆಂಗಳೂರು: ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿ ರಾಜ್ಯಾದ್ಯಂತ ರೈತರು ಸಂಕಷ್ಟ ಎದುರಿಸುತ್ತಿರುವುದನ್ನ ವಿಪಕ್ಷಗಳು ಗಮನಕ್ಕೆ ತಂದ ಮೇಲೆ ಪ್ರಗಾಢ ನಿದ್ದೆಯಿಂದ ಎದ್ದಿರುವ ರಾಜ್ಯ ಸರ್ಕಾರ ನಿನ್ನೆ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (RAshoka) ಲೇವಡಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ, ಈ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರ್ಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು.
ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.