ಹುಬ್ಬಳ್ಳಿ: ಸಾಯಿನಗರದ ಈಶ್ವರ ದೇವಸ್ಥಾನದ ಬಳಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ (Cylinder blast) ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರವಾಗಿ ಗಾಯಗೊಂಡಿದ್ದ 9 ಜನರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಮಾಲಾಧಾರಿ ಸ್ವಾಮಿ ಸಾವನ್ನಪ್ಪಿದ್ದಾರೆ.
ಡಿ.22 ರಂದು ರಾತ್ರಿ ದೇವರಿಗೆ ಪೂಜೆ ಸಲ್ಲಿಸಿ, ಅಡುಗೆ ಮಾಡಿ ಸೇವಿಸಿದ ಬಳಿಕ ಮಾಲಾಧಾರಿಗಳು ಮಲಗಿದ್ದರು, ಈ ವೇಳೆ ಗ್ಯಾಸ್ ಸರಿಯಾಗಿ ಆಫ್ ಮಾಡದ ಕಾರಣ ಲೀಕ್ ಆಗಿದೆ. ಪರಿಣಾಮ ಅಲ್ಲೇ ಪಕ್ಕದಲ್ಲಿದ್ದ ದೀಪದ ಬೆಂಕಿಗೆ ತಗುಲಿ ಏಕಾಏಕಿ ಬ್ಲಾಸ್ಟ್ ಆಗಿದೆ.
ಸಿಲಿಂಡರ್ ಬ್ಲಾಸ್ಟ್ ಅದ ಹಿನ್ನಲೆ ಅಲ್ಲೇ ಪಕ್ಕದಲ್ಲಿದ್ದ ಮಲಗಿದ್ದ 9 ಜನ ಅಯ್ಯಪ್ಪಸ್ವಾಮಿಯ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ 29 ವರ್ಷದ ಶಂಕರ್ ಚೌಹಾಣ್ ಎಂಬುವವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸದ್ಯ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಆಗಮಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.