ಬೆಂಗಳೂರು (Bus ticket price hike): ಮುಖ್ಯಮಂತ್ರಿ ಸಿದ್ದರಾಮಯ್ಯನವರೇ,
ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಜ.05 ರಿಂದ ನಾಲ್ಕು ನಿಗಮಗಳ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿ, ಟ್ವಿಟ್ ಮಾಡಿರುವ ಅವರು, “ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ” ಎಂಬುದನ್ನು ಇದೀಗ ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ.
ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ Buy-1 Get-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ.
ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ವಿಜಯೇಂದ್ರ ಗುಡುಗಿದ್ದಾರೆ.
ದಂಗೆ ಏಳುವುದೂ ಅನಿವಾರ್ಯ: ಆರ್ ಅಶೋಕ
ವಿರೋಧ ಪಕ್ಷದ ನಾಯಕ ಆರ್ ಅಶೋಕ ಟ್ವಿಟ್ ಮಾಡಿ, ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ 15% ಏರಿಕೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ನವರೇ, ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು?
ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ:
⬆️ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ
⬆️ಆಸ್ತಿ ತೆರಿಗೆ ಏರಿಕೆ ಅನಿವಾರ್ಯ
⬆️ಮುದ್ರಾಂಕ ದರ ಏರಿಕೆ ಅನಿವಾರ್ಯ
⬆️ನೀರಿನ ದರ ಏರಿಕೆ ಅನಿವಾರ್ಯ
⬆️ಜನನ ಮರಣ ಪ್ರಮಾಣಪತ್ರ ಶುಲ್ಕ ಏರಿಕೆ ಅನಿವಾರ್ಯ
⬆️ಹಾಲಿನ ದರ ಏರಿಕೆ ಅನಿವಾರ್ಯ
⬆️ ಬಸ್ ದರ ಏರಿಕೆ ಅನಿವಾರ್ಯ
ಶೀಘ್ರದಲ್ಲೇ ಕನ್ನಡಿಗರು ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದಿದ್ದಾರೆ.