ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ.
21 ವರ್ಷದ ಎಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ಪಾವನ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಮಾಬಾಯಿ ಅಂಬೇಡ್ಕರ್ ಮಹಿಳಾ ವಸತಿ ನಿಲಯದಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತ ವಿದ್ಯಾರ್ಥಿನಿ ಎಚ್.ಡಿ.ಕೋಟೆ ತಾಲೂಕಿನ ನಿವಾಸಿ ಎನ್ನಲಾಗಿದೆ.
ನಿನ್ನೆ ಬೆಳಗ್ಗೆ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪಾವನ ಕಾರ್ಯಕ್ರಮ ನಡೆಯುವಾಗಲೇ ಅರ್ಧಕ್ಕೆ ಎದ್ದು ತನ್ನ ರೂಮ್ಗೆ ಬಂದಿದ್ದರು. ಬಳಿಕ ಡೆತ್ ನೋಟ್ ಬರೆದು ಆತ್ಮಹತ್ಯೆ. ಮಾಡಿಕೊಂಡಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಇತರ ವಿದ್ಯಾರ್ಥಿನಿಯರು ರೂಮಿಗೆ ಬಂದಾಗ ವಿಚಾರ ಗೊತ್ತಾಗಿದೆ. ಸ್ಥಳಕ್ಕೆ ಆಗಮಿಸಿದ ಜ್ಞಾನಭಾರತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಕೆಯ ಬಳಿ ಡೆತ್ ನೋಟ್ ಪತ್ತೆಯಾಗಿದೆ.
ಸದ್ಯ ಆಸಹಜ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆಯ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ. ಪಾವನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು.
ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ ಎಂದು ಜ್ಞಾನಭಾರತಿ ಪೊಲೀಸರು ಮಾಹಿತಿ ನೀಡಿದ್ದಾರೆ.