ಆನೇಕಲ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲಿಯೇ ಪತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ (Murder) ಕೊಂದಿರುವ ಅಮಾನುಷ ಘಟನೆ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು 29 ವರ್ಷದ ಶ್ರೀಗಂಗಾ ಎಂದು ಗುರುತಿಸಲಾಗಿದ್ದು, ಮೋಹನ್ ರಾಜು ಕೊಲೆ ಆರೋಪಿ ಪತಿ ಎನ್ನಲಾಗಿದೆ.
ಇಂದು ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ತೆರಳುತ್ತಿದ್ದ ಹೆಂಡತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಚುಚ್ಚಿ ಚುಚ್ಚಿ ಪತಿ ಕ್ರೌರ್ಯ ಮೆರೆದಿದ್ದಾನೆ.
ವ್ಯಕ್ತಿಯೋರ್ವನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಪತಿ ಈ ಕೃತ್ಯ ಎಸಗಿದ್ದಾನೆ.
ಬೆಂಗಳೂರು ಹೊರವಲಯದ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿರುವ ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ.
ಆದರೆ ವ್ಯಕ್ತಿಯೋರ್ವನ ಜೊತೆಗೆ ಶ್ರೀಗಂಗಾ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಅನುಮಾನದಿಂದ ಮೋಹನ್ ರಾಜ್ ಪತ್ನಿ ಶೀಲ ಶಂಕಿಸಿ ಗಲಾಟೆ ಮಾಡುತ್ತಿದ್ದನಂತೆ
ಕೊನೆಗೆ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಳೆದ 8 ತಿಂಗಳಿನಿಂದ ಮೋಹನ್ ರಾಜ್ ಹಾಗೂ ಶ್ರೀಗಂಗಾ ದೂರವಾಗಿದ್ದರು.
ನಿನ್ನೆ ರಾತ್ರಿ ಮೋಹನ್ ರಾಜ್ ತನ್ನ ಮಗುವನ್ನ ನೋಡಲು ಶ್ರೀಗಂಗಾಳ ಮನೆಗೆ ತೆಳಿದ್ದ. ಆ ವೇಳೆ ಇಬ್ಬರ ನಡುವೆ ಮತ್ತೆ ಜಗಳವಾಗಿದೆ. ಇದರಿಂದ ಕೋಪಗೊಂಡಿದ್ದ ಮೋಹನ್ ರಾಜ್, ಇಂದು ಬೆಳಗ್ಗೆ ಶ್ರೀಗಂಗಾ ಮಗುವನ್ನ ಶಾಲೆಗೆ ಬಿಡಲು ಬೈಕ್ನಲ್ಲಿ ಬಂದಿದ್ದ ವೇಳೆ ಕಾದು ಕುಳಿತಿದ್ದ ಪತಿ ಮೋಹನ್ ರಾಜ್, ಪತ್ನಿ ಶ್ರೀಗಂಗಾ ಮೇಲೆ ಹಲ್ಲೆ ಮಾಡಿದ್ದು, ಏಳೆಂಟು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದ ಶ್ರೀಗಂಗಾಳನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ನ ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಸಿಕೆ ಬಾಬ ತಿಳಿಸಿದ್ದಾರೆ.