ಬೆಂಗಳೂರು ಗ್ರಾಮಾಂತರ ಜಿಲ್ಲೆ; ದ್ವಿತೀಯ ಪಿಯುಸಿ (PUC) ಪರೀಕ್ಷೆಯು ಮಾ.1ರಿಂದ ಆರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ ಈ ಬಾರಿ 11431 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 20 ವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಕೈಗೊಂಡಿರುವ ಸಿದ್ದತೆ ಕುರಿತು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3, ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 5 ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ 6 ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ 11341 ವಿದ್ಯಾರ್ಥಿಗಳಲ್ಲಿ 10757 ಹೊಸ ವಿದ್ಯಾರ್ಥಿಗಳು, 183 ಖಾಸಗಿ ವಿದ್ಯಾರ್ಥಿಗಳು, 401 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಬಾಲಕಿಯರ ಸಂಖ್ಯೆ ಹೆಚ್ಚು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಲ್ಲಿ ಬಾಲಕಿಯರ ಸಂಖ್ಯೆ ಮುಂದಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6247 ಬಾಲಕಿಯರು ಮತ್ತು 5094 ಬಾಲಕರು ಬರೆಯಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಕ್ರಮಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಸರಕಾರಿ ಪದವಿಪೂರ್ವ ಕಾಲೇಜು, 3 ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜು, 6 ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳು
ದೊಡ್ಡಬಳ್ಳಾಪುರ: ಸರ್ಕಾರಿ ಪದವಿಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಶ್ರೀ ದೇವರಾಜ ಅರಸು ಪದವಿಪೂರ್ವ ಕಾಲೇಜು.
ದೇವನಹಳ್ಳಿ: ಸರ್ಕಾರಿ ಪದವಿಪೂರ್ವ ಕಾಲೇಜು, ವಿಜಯಪುರ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜು.
ಹೊಸಕೋಟೆ: ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಮಹಾದೇವ ಪದವಿಪೂರ್ವ ಕಾಲೇಜು, ವಿದ್ಯಾವನ ಪದವಿಪೂರ್ವ ಕಾಲೇಜು, ನಂದಗುಡಿ ಸರ್ಕಾರಿ ಪದವಿಪೂರ್ವ ಕಾಲೇಜು.
ನೆಲಮಂಗಲ: ಸರ್ಕಾರಿ ಪದವಿಪೂರ್ವ ಕಾಲೇಜು, ಬಸವೇಶ್ವರ ಪದವಿಪೂರ್ವ ಕಾಲೇಜು, ಬಸವೇಶ್ವರ ಬಾಲಕಿಯರ ಪದವಿಪೂರ್ವ ಕಾಲೇಜು, ಹೊಯ್ಸಳ ಪದವಿಪೂರ್ವ ಕಾಲೇಜು, ದಿವ್ಯ ಜ್ಯೋತಿ ಪದವಿಪೂರ್ವ ಕಾಲೇಜು, ತ್ಯಾಮಗ್ಲೊಂಡು ಸರ್ಕಾರಿ ಪದವಿಪೂರ್ವ ಕಾಲೇಜು.
ಉಚಿತ ಸಾರಿಗೆ ಸೌಲಭ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬಿ.ಎಂ.ಟಿ.ಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯವಿದೆ.
ವಿದ್ಯಾರ್ಥಿಗಳು ಉಚಿತ ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಕಾನೂನು ವ್ಯವಸ್ಥೆ: ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಾಗೃತ ದಳ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಪೊಲೀಸ್ ಭದ್ರತಾ ವ್ಯವಸ್ಥೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಪರೀಕ್ಷಾ ದಿನಗಳು
ಮಾ.1 ಕನ್ನಡ, ಅರೇಬಿಕ್
ಮಾ.3 ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾ.5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.7 ಇತಿಹಾಸ, ಭೌತಶಾಸ್ತ್ರ
ಮಾ.10 ಐಚ್ಫಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹವಿಜ್ಞಾನ.
ಮಾ.12 ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ.
ಮಾ.13 ಅರ್ಥಶಾಸ್ತ್ರ
ಮಾ.15 ಇಂಗ್ಲೀಷ್
ಮಾ.17 ಭೂಗೋಳಶಾಸ್ತ್ರ
ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕವಿಜ್ಞಾನ.
ಮಾ.19 ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾ.20. ಹಿಂದಿ