ದೊಡ್ಡಬಳ್ಳಾಪುರ (harithalekhani): ನಗರದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( CET) ಪ್ರಾರಂಭಗೊಂಡಿತು.
ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ವಾಣಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸುವ ದೃಶ್ಯ ಕಂಡು ಬಂತು.
ಮೊದಲ ದಿನ 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪತ್ರಿಕೆಯನ್ನು ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಸಿಇಟಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.
5 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಮೂಲ ಸೌಕರ್ಯಗಳ ಕಲ್ಪಿಸುವ ವ್ಯವಸ್ಥೆ ಮಾಡಿದ್ದಾರೆ.
ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಕಡಿವಾಣಕ್ಕಾಗಿ ಕ್ಯೂ ಆರ್ ಸ್ಕ್ಯಾನ್ (QR Scan) ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಪರಿಶೀಲಿಸಿ ಕ್ಯೂಅರ್ ಸ್ಕ್ಯಾನ್ ಮಾಡುತ್ತಿದ್ದ ದೃಶ್ಯ ಕಂಡು ಬಂತು.
ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲೆ ಪೊಲೀಸ್ ಮತ್ತು ಪರೀಕ್ಷಾ ಸಿಬ್ಬಂದಿ ಯವರು ಕಟ್ಟುನಿಟ್ಟಾಗಿ ಸಮವಸ್ತ್ರ ಪಾಲನೆ, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ ತಪಾಸಣೆ ಮಾಡುತ್ತಿದ್ದರು.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಿಇಟಿ ಪರೀಕ್ಷೆಯ 5 ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದೆ. ಯಾವುದೇ ಲೋಪಗಳು ಉಂಟಾಗದಂತೆ ಪರೀಕ್ಷೆಗಳು ಸುಗಮವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ 688, ಮಾದಗೊಂಡನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 432, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 360, ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜಿನಲ್ಲಿ 270, ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 271 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್.ಮೋಹನ್ ಕುಮಾರ್ ತಿಳಿಸಿದರು.