ದೊಡ್ಡಬಳ್ಳಾಪುರ: ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡದ ಮನಸ್ಸುಗಳು ಏಕೀಕರಣವಾಗಬೇಕು ಎಂದು ದೈಹಿಕ ಶಿಕ್ಷಣ ಶಿಕ್ಷಕ ಬರಗೂರು ನರಸಿಂಹ ಮೂರ್ತಿ ತಿಳಿಸಿದರು.
ತಾಲೂಕಿನ ಆರೂಢಿ ಗ್ರಾಮದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ಹಾಗೂ ಗ್ರಾಮಸ್ಥರಿಂದ ಶನಿವಾರ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ನಂತರದ ಅವರು ಮಾತನಾಡಿದರು.
ಕನ್ನಡಿಗರಾದ ನಾವು ನಾಡಿನಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಕನ್ನಡ ರಾಜ್ಯೋತ್ಸವದ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿರಂತರವಾಗಿರುವುದು ಹೆಮ್ಮೆಯ ವಿಚಾರ. ಈ ಶುಭ ಸಮಾರಂಭದಲ್ಲಿ ಎಲ್ಲರಿಗೂ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಕರ್ನಾಟಕ ಏಕೀಕರಣ ಮಾಡಲಾಯಿತು ಎಂದರು.
ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ.
ರಾಜ್ಯ ಪುನರ್ವಿಂಗಡಣ ಸಮಿತಿಯು ಮೈಸೂರು ರಾಜ್ಯಕ್ಕೆ ಬಂದು ಮೊದಲು ನಡೆಸಿದ ಮೊದಲ ಸಭೆಯಲ್ಲಿ ಅಂದಿನ ರಾಜ ಪ್ರಮುಖರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರು ಏಕೀಕರಣದ ಪರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ನಾವು ಸ್ಮರಿಸಬೇಕು.
ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಧ್ವನಿ ಎತ್ತಿದವರು ಸಾಹಿತಿಗಳು ಹಾಗೂ ರಾಜಕಾರಣಿಗಳು. ರಾಷ್ಟ್ರಕವಿ ಕುವೆಂಪು ಅವರು ಸಹ ಕರ್ನಾಟಕ ಏಕೀಕರಣಕ್ಕೆ ಒತ್ತಾಸೆಯಾಗಿ ನಿಂತಿದ್ದರು. ಕವೆಂಪು ಅವರ `ಜೈ ಭಾರತ ಜನನಿನಿಯ ತನುಜಾತೆ’ ಗೀತೆಯು ನಮ್ಮ ರಾಜ್ಯದ ನಾಡಗೀತೆಯಾಗಿದೆ. ಸಾಹಿತಿಗಳು, ಚಿಂತಕರು, ಲೇಖಕರು ತಮ್ಮ ಬರಹಗಳ ಮೂಲಕ ಏಕೀಕರಣದ ಪರವಾಗಿ ಧ್ವನಿಗೂಡಿಸಿದರು.
ಹೀಗೆ, ಕನ್ನಡ ನಾಡಿನ ಸ್ಥಾಪನೆಗೆ ಹಾಗೂ ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಅನೇಕರು ಶ್ರಮಿಸಿದ್ದಾರೆ. ಅವರೆಲ್ಲರನ್ನು ಇಂದು ಗೌರವಪೂರ್ವಕವಾಗಿ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಲಾ ಮಕ್ಕಳು ಕನ್ನಡ ಗೀತೆಗಳನ್ನು ಹಾಡಿದರು. ಆಟೋ ಚಾಲಕರು ವಾಹನಗಳು ಅಲಂಕರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಸಂಜೆ ತಾಯಿ ಭುವನೇಶ್ವರಿಗೆ ಬೆಳ್ಳಿರಥದ ಮೆರವಣಿಗೆ ಆಯೋಜಿಸಲಾಗಿದೆ.
ಈ ವೇಳೆ ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ಯುವ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……