ಮಂಡ್ಯ: ಶ್ರೀ ಆದಿಚುಂಚನಗಿರಿ ಕ್ಷೇತ್ರದ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರು ಪಾಲ್ಗೊಂಡರು.
ಪ್ರಮುಖರಿಬ್ಬರೂ ಭಾರತದ ಸಮಗ್ರ ಅಭಿವೃದ್ಧಿ, ಮುನ್ನಡೆಯ ಕುರಿತು ವಿದ್ಯಾರ್ಥಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು ಹಾಗೂ ರಾಷ್ಟ್ರದ ಮುನ್ನಡೆಯ ಬಗ್ಗೆ ತಮ್ಮ ಕನಸುಗಳನ್ನು ಹಂಚಿಕೊಂಡರು.
ಎಲ್ಲಾ ಕ್ಷೇತ್ರಗಳಲ್ಲಿಯೂ ಭಾರತದ ಸಮಗ್ರವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಇಬ್ಬರೂ ಅಗ್ರಗಣ್ಯರು ಪ್ರತಿಪಾದಿಸಿದರು.

ಜಾಗತಿಕ ನೆಲೆಗಟ್ಟಿನಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಭಾರತ ಸಾಧಿಸುತ್ತಿರುವ ಅಭಿವೃದ್ಧಿಯ ಮೇಲೆ ಬೆಳಕು ಚೆಲ್ಲಿದ ಗಣ್ಯರಿಬ್ಬರೂ, ಬಹು ಮುಖ್ಯವಾಗಿ ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಸೇರಿದಂತೆ ಅನುಷ್ಠಾನಕ್ಕೆ ಬಂದಿರುವ ಅನೇಕ ಪ್ರಗತಿಪರ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.
ಒಂದೇ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿಗೆ ಪ್ರಯಾಣ:
ಕಾರ್ಯಕ್ರಮದ ನಂತರ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹಾಗೂ ಮಾಜಿ ಪ್ರಧಾನಿಗಳಾದ ದೇವೇಗೌಡರು ಒಂದೇ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ನಾಳೆ ದೇವೆಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿಗಳು
ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿಗಳು ನಾಳೆ (ಶನಿವಾರ) ಬೆಳಗ್ಗೆ 9 ಗಂಟೆಗೆ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿಗಳು, ಶ್ರೀಮತಿ ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.