ಮೈಸೂರು: ನಾಳೆ ನಡೆಯಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಸಮರ ಮೂರು ಪಕ್ಷಗಳ ಅಭ್ಯರ್ಥಿಗಳಿಗೆ ಟೆನ್ಷನ್ ಶುರು ಮಾಡಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಕೂಲ್ ಕೂಲ್ ಆಗಿ ಆದಿವಾಸಿಗಳೊಂದಿಗೆ ಕೋಲಾಟವಾಡಿ ಸಂಭ್ರಮಿಸಿದ್ದಾರೆ.
ಇಂದು ಮತ್ತೆ ನಾಳೆ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಹೆಚ್.ಡಿ ಕೋಟೆ ತಾಲೂಕಿನ ಉದ್ದೂರು ಮತ್ತು ಕೆರೆಹಾಡಿಗೆ ಭೇಟಿ ನೀಡಿ ಇಲ್ಲಿನ ಆದಿವಾಸಿ ಬುಡಕಟ್ಟು ಸಮುದಾಯದ ಜನರ ಕುಂದುಕೊರತೆ ಆಲಿಸಿ, ಕೆಲಕಾಲ ಆದಿವಾಸಿಗಳೊಂದಿಗೆ ಅವರ ಸಾಂಪ್ರದಾಯಿಕ ನೃತ್ಯದಲ್ಲಿ ತಾವೂ ಹೆಜ್ಜೆ ಹಾಕಿ ಖುಷಿಪಟ್ಟರು.
ಸಿಎಂ ಸಿದ್ದರಾಮಯ್ಯ ಭರವಸೆ
ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯ ಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಕೆರೆಹಾಡಿಗೆ ಭೇಟಿ ನೀಡಿ ಅರಣ್ಯವಾಸಿಗಳ ಬಾಯಿಂದಲೇ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಂದಲೂ ಮಾಹಿತಿ ಪಡೆದು ಕೆಲವು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿ, ಸಂಕೀರ್ಣವಾಗಿದ್ದ ಸಮಸ್ಯೆಗಳ ಕುರಿತಾಗಿ ವನ್ಯ ಜೀವಿ ಮಂಡಳಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ತಕ್ಷಣ ಕರೆಂಟು-ನೀರು ಒದಗಿಸಿ
ಹಲವು ದಶಲಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ಕರೆಂಟಿಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ ಎನ್ನುವ ಆದಿವಾಸಿಗಳ ಮಾತು ಕೇಳಿ ಗರಂ ಆದ ಸಿಎಂ, ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ ತೊಂದರೆ ಕೊಡಬೇಡಿ ಎಂದು ಸ್ಪಷ್ಟ ಸೂಚನೆ ನೀಡಿದರು.
ಒಂದು ತಿಂಗಳಲ್ಲಿ ಕರೆಂಟು ನೀರು
ಆದಿವಾಸಿ ಗಣೇಶ, ರಮೇಶ ಎನ್ನುವವರ ಹಟ್ಟಿಯಲ್ಲೇ ನೆಲದ ಮೇಲೆ ಕುಳಿತು ಆದಿವಾಸಿಗಳ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಸಮಸ್ಯೆ ಆಲಿಸಿ, ಅರಣ್ಯಾಧಿಕಾರಿಗಳು ಮತ್ತು ಸಂಬಂಧಪಟ್ಟ ಇತರೆ ಇಲಾಖೆಗಳ ಮುಖ್ಯಸ್ಥರ ಜೊತೆ ಚರ್ಚಿಸಿದರು. ಕೊನೆಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು, “ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ವನ್ಯಜೀವಿ ಮಂಡಳಿ ಸಭೆ ಕರೆದು ಕೂಲಂಕುಷ ಚರ್ಚಿಸಿ ಸೂಕ್ತ ತೀರ್ಮಾನ
ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2,3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ನಮ್ಮ ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವುದೂ ಸೇರಿದಂತೆ ಸಾಲು ಸಾಲು ಸಮಸ್ಯೆಗಳನ್ನು ಹೇಳಿಕೊಂಡ ಆದಿವಾಸಿ ವೆಂಕಟೇಶ್, ನರಸಿಂಹ, ಭಾಗ್ಯಮ್ಮ ಮುಂತಾದವರ ಮಾತು ಕೇಳಿದ ಸಿಎಂ, ಈ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ನೀಡಿದರು.
ಸಮಸ್ಯೆ ಜಟಿಲ ಆಗಿದೆ ಎನಗನುವುದನ್ನು ಅರಿತ ಸಿಎಂ, ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದರು.
ಬಳಿಕ, ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ನೀವು ಹೇಳಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರತ್ಯೇಕ ಆದಿವಾಸಿ ನಿಗಮ
ನಾವು ಅಲೆ ಮಾರಿಗಳಲ್ಲ. ಊರ ನಾಯಕರೂ ಅಲ್ಲ. ನಾವು ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ನಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಮೊದಲ ಮುಖ್ಯಮಂತ್ರಿ ನೀವು
ಆರೇಳು ತಲೆ ಮಾರುಗಳಿಂದ ನಾವಿಲ್ಲೇ ನೆಲೆಸಿದ್ದೇವೆ. ಆದಿವಾಸಿಗಳ ಹಾಡಿಗೆ ಬಂದ ಮೊದಲ ಮುಖ್ಯಮಂತ್ರಿ ನೀವೇ ಎಂದು ಆದಿವಾಸಿಗಳು ಕುಣಿದು ಸಂಭ್ರಮಿಸಿದರು.
ಬಣ್ಣ ಹಚ್ಚಿ ಕುಣ್ಕೊತಾ ಇರ್ಬೇಡಿ. ಚೆನ್ನಾಗಿ ಓದಿ
ಆದಿವಾಸಿ ಮಕ್ಕಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ನಮ್ಮಪ್ಪ ಕೂಡ ಜನಪದ ಡ್ಯಾನ್ಸ್ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ನೀವೂ ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.
ಪಿಯುಸಿವರೆಗೂ ಆಶ್ರಮ ಶಾಲೆ
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳಿದ್ದವು. ನೀವು ಅದನ್ನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೀರಿ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆ ಮುಂದಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ST ಒಳಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬಂದಿಲ್ಲ
ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಿ ಆದಿವಾಸಿಗಳಿಗೆ ಅನುಕೂಲ ಮಾಡಬೇಕು ಎನ್ನುವ ಬೇಡಿಕೆಯೂ ಸಂವಾದದ ಸಂದರ್ಭದಲ್ಲಿ ಆದಿವಾಸಿಗಳು ಮುಂದಿಟ್ಟರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಎಸ್ ಸಿ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು ಎಂದರು.
ಕಾಡುಗೆಣಸು-ಜೇನುತುಪ್ಪ-ಬೆಟ್ಟದ ನೆಲ್ಲಿ
ಆದಿವಾಸಿ ಗಣೇಶ ಮತ್ತು ರಮೇಶ್ ಕುಟುಂಬದವರು ತಮ್ಮ ಗುಡಿಸಲಿಗೆ ಬಂದ ಮುಖ್ಯಮಂತ್ರಿಗಳಿಗೆ ಕಾಡುಗೆಣಸು, ತಾವೇ ಕಿತ್ತು ತಂದಿದ್ದ ಜೇನುತುಪ್ಪ ಮತ್ತು ಬೆಟ್ಟದ ನೆಲ್ಲಿಕಾಯಿ ನೀಡಿ ಸತ್ಕರಿಸಿದರು.
ಜೇನುತುಪ್ಪದಲ್ಲಿ ಕಾಡುಗೆಣಸು ಅದ್ದಿ ತಿಂದ ಮುಖ್ಯಮಂತ್ರಿಗಳು ಬಳಿಕ 500 ರೂ ನೀಡಿ ಜೇನುತುಪ್ಪ ಖರೀದಿಸಿದರು.